ವಿವಿ ಮುಚ್ಚುತ್ತೇವೆ ಎನ್ನುವವರು ವೈನ್ ಸ್ಟೋರ್, ಬಾರ್ ಗಳನ್ನು ಮುಚ್ಚಿ ನೊಡೋಣ-ಆರ್ ಅಶೋಕ್ ಕಿಡಿ
ಬೆಂಗಳೂರು: ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ 8 ವಿಶ್ವವಿದ್ಯಾಲಯಗಳನ್ನು (University) ಮುಚ್ಚಲು ಮುಂದಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಕಿಡಿಕಾರಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ನವರು ಭಾರೀ ಖತರ್ನಾಕ್ಗಳು. ಮೊದಲು ಮಂಡ್ಯ ವಿವಿ ಮುಚ್ಚುತ್ತಿದ್ದಾರೆ. ಮಂಡ್ಯ ಗಂಡು ನಾಡು. ಅಲ್ಲೇ ವಿವಿಗೆ ಕೊಡಲಿ ಪೆಟ್ಟು ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ ಕೊಡುತ್ತಿದೆ. ಮಾರಿ ಕಣ್ಣು ಹೋರಿ ಮೇಲೆ ಅನ್ನುವಂತೆ ಸಿದ್ದರಾಮಯ್ಯ ಕಣ್ಣು ವಿವಿಗಳ ಮೇಲೆ ಬಿದ್ದಿದೆ. 9 ವಿವಿಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.
ಕೆಆರ್ಎಸ್ ಪಕ್ಕ ಅಮ್ಯೂಸ್ಮೆಂಟ್ ಪಾರ್ಕ್ ಮಾಡುತ್ತಾರಂತೆ. ಇದಕ್ಕೆ 1000 ಸಾವಿರ ಕೋಟಿ ರೂ. ಕೊಡುತ್ತಿದ್ದಾರೆ. ಜಲಕ್ರೀಡೆಗೆ ಹಣ ನೀಡುತ್ತಾರೆ ಆದರೆ ವಿಶ್ವವಿದ್ಯಾಲಯ ಮುಚ್ಚಿಸುತ್ತಾರೆ. ಈ ಕಾಂಗ್ರೆಸ್ನವರು ಅಪರೂಪದ ಪೀಸ್ಗಳು ಎಂದು ವಾಗ್ದಾಳಿ ನಡೆಸಿದರು.
ಉನ್ನತ ಶಿಕ್ಷಣ ವಲಯದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಉಪನ್ಯಾಸಕರ ನೇಮಕ ಆಗಿಲ್ಲ, ಅತಿಥಿ ಉಪನ್ಯಾಸಕರಿಗೆ ವೇತನ ಇಲ್ಲ. ಶಾಲೆ ಕಾಲೇಜು ಕಟ್ಟಡಗಳ ದುರಸ್ತಿ ಇಲ್ಲ ಪಠ್ಯಪುಸ್ತಕ, ಸಮಸವಸ್ತ್ರ ಕೊಡಲು ಕಾಸಿಲ್ಲ, ಮನಸಿಲ್ಲ. ಕೆಪಿಎಸ್ಸಿಯಲ್ಲಿ ತಪ್ಪಿಲ್ಲದೇ ಸರಿಯಾಗಿರುವ ಪ್ರಶ್ನೆ ಪತ್ರಿಕೆ ಕೊಡುವ ಯೋಗ್ಯತೆ ಇಲ್ಲ. ಈಗ ನಾಲ್ಕು ಲಕ್ಷ ಕೋಟಿ ಮೊತ್ತದ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಹೊರಟಿದ್ದಾರೆ. ಈ ಬಜೆಟ್ನಲ್ಲಿ ವಿಶ್ವವಿದ್ಯಾಲಯಗಳಿಗೆ ಕೇವಲ 342 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.
ವಿವಿ ಮುಚ್ಚುತ್ತೇವೆ ಎನ್ನುವವರು ವೈನ್ ಸ್ಟೋರ್, ಬಾರ್ ಗಳನ್ನು ಮುಚ್ಚಿ ನೊಡೋಣ. ಇದೇ ಕಾಂಗ್ರೆಸ್ ನೀತಿ. ನಮ್ಮ ವಿದ್ಯಾರ್ಥಿಗಳು ಅಧ್ಯಯನಕ್ಕೆ ಪರ ರಾಜ್ಯಕ್ಕೆ ಹೋಗಬೇಕೇ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದರು.
![]()